ನಂಜರಾಜ ಬಹದ್ದೂರ್ ಛತ್ರದ ಮುಂದೆ ಸಾಗುವ ರಸ್ತೆ ಶಿವರಾಮ ಪೇಟೆಯ ಮುಖ್ಯ ರಸ್ತೆಗಳಲೊಂದು, ಮೈಸೂರಿನ ಹಳೆ ತಲೆಮಾರಿನ ಅಂಗಡಿ ಮುಂಗಟ್ಟುಗಳು ರಸ್ತೆಯುದ್ದಕ್ಕೂ ಚಿಕ್ಕಗಡಿಯಾರ ವೃತ್ತದವರೆಗೆ ಪೊಣಿಸಿದಂತೆ ಎರಡು ಬದಿಯಲ್ಲಿ ಸಾಲುಗಟ್ಟಿವೆ. ಮೊದಲು ಬಲಕ್ಕೆ ಸಿಗುವ ಶೃಂಗಾರ್ ಹೋಟೆಲು, ಅದೇ ಸಾಲಿನಲ್ಲಿ ನಾಲ್ಕೈದು ಮಳಿಗೆಗಳನ್ನು ದಾಟಿ ಸಾಗಿದರೆ ಎದಿರಾಗುವುದು ಚಂದ್ರು ಸೌಂಡ್ ಸಿಸ್ಟಮ್. ಸುಮಾರು ೧೦೦-೧೫೦ ವರ್ಷಗಳಷ್ಟು ಹಳೆಯದಾದ ಮಂಗಳೂರು ಹೆಂಚಿನ ಚಾವಣಿಯ ಕಟ್ಟಡ, ಒಳಗೆ ಪ್ರವೇಶಿಸುತ್ತಿದ್ದಂತೆ ಎಡಭಾಗದಲ್ಲಿ ಟೆಲಿಪೋನ್ ಭೂತಿನ ಎರಡು ಡಬ್ಬಗಳು, ಬಲಭಾಗದಲ್ಲಿ ಕೂರಲು ಹಾಕಿದ್ದ ಬೆಂಚು. ಒಳಕೋಣೆಯಲ್ಲಿ ದಡೂತಿ ಮರದ ಪೆಟ್ಟಿಗೆಗಳ ಹಾಗೆ ಕಾಣುತ್ತಿದ್ದ ಧ್ವನಿವರ್ಧಕಗಳು, ಮೂಲೆಗೆ ಆತುಕೊಂಡಿದ್ದ ಮರದ ಕಪಾಟಿನ ತುಂಬಾ ಸಾಲು ಸಾಲಾಗಿ ಜೋಡಿಸಿದ್ದ ಗ್ರಾಮೊಫೋನು ತಟ್ಟೆಗಳು, ಟೇಪ್ ರೇಕಾರ್ಡ್ ಮಾಡಲು ಬಳಸುತ್ತಿದ್ದ ಬೆಳ್ಳಿ ಬಣ್ಣದ ಹೊಳೆವ ಫಿಲಿಫ್ಸ್ ರೇಕಾರ್ಡರ್, ವಿವಿಧ ಬಣ್ಣ ಗಾತ್ರದ ಮೂರ್ನಾಲ್ಕು ಗ್ರಾಮೊಫೋನ್ ಪ್ಲೇಯರುಗಳು. ಪಕ್ಕದ ಕೋಣೆಯಿಂದ ಆಗಾಗ ಸದ್ದುಮಾಡುತ್ತಾ ಮೌನವಾಗುತ್ತಾ ಕುಟ್ಟುವ ಬೆರಳುಗಳಿಗಾಗಿ ಹಪಹಪಿಸುವ ಬೆರಳಚ್ಚು ಯಂತ್ರಗಳು. ಆ ಹೊತ್ತಿಗಾಗಲೆ ಕಂಪ್ಯೂಟರ್ ಡಿಟಿಪಿ ಸೆಂಟರುಗಳ ಭರಾಟೆಯಿಂದ ತಮ್ಮ ಅಸ್ಥಿತ್ವ ಕಳೆದುಕೊಳ್ಳುತ್ತ ಅವಸಾನದ ಅಂಚಿನಲ್ಲಿದ್ದ ಬೆರಳಚ್ಚು ಯಂತ್ರಗಳು ಮತ್ತು ಅವಲಂಬಿತರು.
ಸಾವಿರಾರು ಗ್ರಾಮೊಫೋನು ತಟ್ಟೆಗಳ ಸವಿವರವಾದ ಮಾಹಿತಿಯನ್ನ ಸುಮಾರು ೫೦೦ ಪುಟಗಳ ಪುಸ್ತಕದಲ್ಲಿ ಕನ್ನಡ, ಹಿಂದಿ, ಇತರೆ ಹೀಗೆ ವರ್ಗಿಕರಿಸಿ ಚಿತ್ರ ಬಿಡುಗಡೆಯಾದ ಇಸವಿಯ ಅನುಕ್ರಮವಾಗಿ ಬರೆದಿಟ್ಟಿದ್ದರು. ನಾವು ಭೇಟಿ ನೀಡಿದಾಗಲೆಲ್ಲ ಪುಸ್ತಕದ ಪ್ರತಿ ಹಾಳೆಯನ್ನ ತನ್ಮಯತೆಯಿಂದ ತಿರುವಿ, ನಮಗಿಷ್ಟವಾದ ಪಟ್ಟಿ ತಯಾರಿಸಿ ಕ್ಯಾಸೆಟ್ ನೊಂದಿದೆ ಮಾದೇವನಿಗೆ ಕೊಟ್ಟರೆ ಅರ್ಧ ಕೆಲಸ ಮುಗಿದ ಹಾಗೆ. ಅವನಿಗೆ ಆಗಾಗ ಕಾಫಿ ಸಿಗರೇಟು ಕೊಡಿಸಿ ನಮ್ಮ ಕೆಲಸಕ್ಕೆ ವಿಶೇಷ ಗಮನ ಕೊಡುವಂತೆ ನೋಡಿಕೊಳ್ಳುತ್ತಾ, ಒಂದೊಂದು ಕ್ಯಾಸೆಟ್ ರೆಕಾರ್ಡ್ ಮಾಡಿಸುವಾಗಲು ಅದೆಷ್ಟು ಬಾರಿ ಅವನ ಅಂಗಡಿಗೆ ಅಲೆದಿದ್ದೆವೊ ದೇವರೆ ಬಲ್ಲ. ಮತ್ತೆಲ್ಲು ಸಿಗದ ಸಂಗ್ರಹ ಅವನ ಬಳಿ ಇದ್ದುದ್ದರಿಂದ ನಮಗೂ ಅನ್ಯ ಮಾರ್ಗವಿರಲಿಲ್ಲ. ಕ್ಯಾಸೆಟ್ಟು ಕೊಳ್ಳಲು ೩೦ ರೂ, ಮಾದೇವನಿಗೆ ೨೫ ರೂ, ನಾಲ್ಕೈದು ಬಾರಿ ಅಲೆದಾಡಿದ್ದಕ್ಕೆ ಪೆಟ್ರೊಲ್ ಖರ್ಚು ೩೦ ರಿಂದ ೪೦ ರೂ ಹೀಗೆ ೧೦೦ ರೂಗಳ ಗಡಿ ತಲುಪುತ್ತಿತ್ತು ನಮ್ಮ ಹಾಡುಗಳ ಖಯಾಲಿ. ಒಮ್ಮೆ ಹಾಡುಗಳನ್ನ ಕೇಳಿದರೆ ಅಷ್ಟೆಲ್ಲ ಪರಿಶ್ರಮ ವ್ಯರ್ಥವಾಗಿಲ್ಲ ಅನ್ನೊ ಸಮಾಧಾನ. ಚೀಟಿಯಲ್ಲಿ ಬರೆದ ಹಾಡಿನೆಡೆಗೆ ಕಣ್ಣಾಡಿಸಿ ಕಪಾಟಿನ ಸಾಲುಗಳಲ್ಲಿ ಅಡಗಿದ್ದ ಸಾವಿರಾರು ಕರಿಯ ತಟ್ಟೆಗಳಲ್ಲಿ ನಿಖರವಾದುದನ್ನು ಒಮ್ಮೆಲೆ ತೆಗೆಯಬಲ್ಲ ಅವನ ಪರಿಣತಿಯನ್ನ ಮೆಚ್ಚಲೆ ಬೇಕು, ಅಷ್ಟಲ್ಲದೆ ತಿರುಗುತ್ತಿರುವ ಗ್ರಾಮೊಫೋನಿನ ಮೇಲೆ ತಟ್ಟೆ ಇರಿಸಿ ಒಂದೆ ಕ್ಷಣದಲ್ಲಿ ನಮಗೆ ಬೇಕಾದ ಹಾಡಿನ ಪ್ರಾರಂಭಕ್ಕೆ ಮುಳ್ಳನ್ನು ಇರುಸಿ ರೆಕಾರ್ಡಿಂಗ್ ಚಾಲು ಮಾಡುವಾಗ ಅವನ ಆತ್ಮವಿಶ್ವಾಸ ಮತ್ತು ಅನುಭವ ಎದ್ದುಕಾಣುತ್ತಿದ್ದವು. ಇವತ್ತಿಗೂ ಅವನು ಮಾಡಿಕೊಟ್ಟ ಕ್ಯಾಸೆಟ್ಟುಗಳ ಸಾಲುಗಳು ಮನೆಯ ಕಪಾಟಿನಲ್ಲಿ ಕೇಳುವವರಿಗಾಗಿ ಕಾದಿವೆ. ನಂತರದ ಎಂಪಿತ್ರಿ ಕ್ರಾಂತಿಯ ಭರಾಟೆಯಲ್ಲಿ ತನ್ನ ಅಳಿದುಳಿದ ಕರಿಯ ತಟ್ಟೆಗಳಲ್ಲಿ ಮಾದೇವ ಎಲ್ಲಿ ಕಳೆದು ಹೋದನೊ ಗೊತ್ತಿಲ್ಲ. ಅವನ ಅಂಗಡಿಯ ಬಾಗಿಲಿಗೆ ಜೋತುಬಿದ್ದ ಭಾರದ ಬೀಗ ಮಾತಾಡದೆ ಮೌನವಾಗಿದೆ.




